ಅತ್ಯಾಚಾರಿ ಆರೋಪಿ ಬ್ರಿಜ್ ಭೂಷಣ್ ಬಂಧನಕ್ಕೆ ಆಗ್ರಹ: ದಾವಣಗೆರೆ ಜಿಲ್ಲಾ ಕ್ರೀಡಾಪಟುಗಳ ಸಂಘದಿಂದ ಪ್ರತಿಭಟನೆ
ದಾವಣಗೆರೆ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಬಿಜೆಪಿ ಬಿಜೆಪಿ ಸಂಸದ ಮತ್ತು ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಕೂಡಲೇ ಬಂಧಿಸಿ ಸಂಸದ ಸ್ಥಾನದಿಂದ ವಜಾಗೊಳಿಸಬೇಕೆಂದು ದಾವಣಗೆರೆ ಜಿಲ್ಲಾ ಕ್ರೀಡಾಪಟುಗಳ ಸಂಘ ಒತ್ತಾಯಿಸಿದೆ.
ಜಿಲ್ಲಾ ಯುವ ಜನ ಸೇವೆ ಮತ್ತು ಕ್ರೀಡಾ ಇಲಾಖೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಜಿಲ್ಲಾ ಕ್ರೀಡಾಪಟುಗಳ ಸಂಘದ ಪದಾಧಿಕಾರಿಗಳು ಮತ್ತು ಕ್ರೀಡಾಪಟುಗಳು ಬಿಜೆಪಿ ಸಂಸದ ಮತ್ತು ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ರನ್ನು ಕೇಂದ್ರ ಸರಕಾರ ರಕ್ಷಿಸುತ್ತಿದ್ದು, ರಾಷ್ಟ್ರಪತಿಗಳು ಈ ಕೂಡಲೇ ಮಧ್ಯಪ್ರವೇಶಿಸಬೇಕೆಂದು ಮನವಿ ಮಾಡಿದರು.
ನಗರಸಭೆ ಮಾಜಿ ಅಧ್ಯಕ್ಷ ಕೆ.ಜಿ.ಶಿವಕುಮಾರ್ ಮಾತನಾಡಿ ಜಾಗತಿಕ ನಾಯಕ ಎಂದು ಹೇಳಿಕೊಳ್ಳುವ ಪ್ರಧಾನಿ ನರೇಂದ್ರ ಮೋದಿ ಅವರು ಅಂತರಾಷ್ಟ್ರೀಯ ವೇದಿಕೆಯಲ್ಲಿ ಭಾರತದ ಪ್ರತಿಷ್ಠೆಯನ್ನು ಹಾಳುಮಾಡಿದ್ದಾರೆ. 176 ದೇಶಗಳ ವಿಶ್ವ ಕುಸ್ತಿ ಒಕ್ಕೂಟ ಭಾರತಕ್ಕೆ ನಿಷೇಧದ ಎಚ್ಚರಿಕೆ ನೀಡಿದ್ದು, ಏಷ್ಯನ್ ಚಾಂಪಿಯನ್ಶಿಪ್ ಈಗಾಗಲೇ ಭಾರತದಿಂದ ದೂರ ಸರಿದಿದೆ. ಯುನೈಟೆಡ್ ವರ್ಲ್ಡ್ ಪ್ರೆಸ್ಲಿಂಗ್ ಭಾರತದ ಕುಸ್ತಿ ಒಕ್ಕೂಟದ ಮೇಲೆ ನಿಷೇಧ ಹೇರಿದರೆ ಒಲಿಂಪಿಯನ್ಗಳು ತಟಸ್ಥ ಧ್ವಜದಡಿಯಲ್ಲಿ ಆಡಬೇಕಾಗಲಿದೆ ಎಂದು ಎಚ್ಚರಿಸಿದರು.
ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ ಮತ್ತು ನೂರಾರು ಸಂಖ್ಯೆಯಲ್ಲಿ ಜನರು ಉಪಸ್ಥಿತರಿದ್ದರು.