ಮುಖ್ಯಮಂತ್ರಿಯವರಿಂದ ಕಂಬಳಕ್ಕೆ ವಾರ್ಷಿಕ 5 ಕೋಟಿ ಅನುದಾನದ ಭರವಸೆ
ರಾಜ್ಯ ಕಂಬಳ ಅಸೋಸಿಯೇಶನ್ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಮಾಹಿತಿ
(Udupi) ಉಡುಪಿ: ಅಂತರಾಷ್ಟ್ರೀಯ ಮಟ್ಟದಲ್ಲಿ ಲಕ್ಷಾಂತರ ಮಂದಿ ವೀಕ್ಷಿಸುವ ಕಂಬಳ ಇದೀಗ ರಾಜ್ಯ ಕ್ರೀಡೆಯಾಗಿದ್ದು, ಕರಾವಳಿ ಕರ್ನಾಟಕದ ಪ್ರವಾಸೋದ್ಯಮ ಉತ್ತೇಜನಕ್ಕೆ ಕಂಬಳ ಕ್ರೀಡೆಯು ಪ್ರಾಮುಖ್ಯತೆ ಪಡೆದಿದೆ.
ಕಂಬಳಕ್ಕೆ ನೂರಾರು ವರ್ಷದ ಇತಿಹಾಸವಿದ್ದು, ಇದೀಗ ರಾಜ್ಯ ಸರಕಾರ ಕಂಬಳಕ್ಕೆ ರಾಜ್ಯ ಮಾನ್ಯತೆ ನೀಡಿದ್ದು, ಮಾನ್ಯ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ರವರು ಕಂಬಳ ಆಯೋಜನೆಗೆ ಪ್ರತಿವರ್ಷ ಬಜೆಟ್ನಲ್ಲಿ 5 ಕೋಟಿ ಅನುದಾನ ನೀಡುವ ಭರವಸೆ ನೀಡಿದ್ದಾರೆಂದು ರಾಜ್ಯ ಕಂಬಳ ಅಸೋಸಿಯೇಶನ್ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ತಿಳಿಸಿದ್ದಾರೆ.
ಮುಖ್ಯಮಂತ್ರಿಗಳ ಪ್ರಥಮ ಸಂಪುಟ ಸಭೆಯಲ್ಲಿ ಕಂಬಳಕ್ಕೆ ವಿಶೇಷ ಸಹಕಾರ ಹಾಗೂ ರಾಜ್ಯ ಕಂಬಳ ಅಸೋಸಿಯೇಶನ್ ಹೆಚ್ಚಿನ ಅಧಿಕಾರ ಮತ್ತು ಅನುದಾನ ನೀಡುವ ಭರವಸೆ ನೀಡಿದ್ದಾರೆ. ಕಂಬಳವನ್ನು ಮೈಸೂರು ದಸರಾದಲ್ಲಿ ನಡೆಸುವ ಬಗ್ಗೆ ವಿಶೇಷ ಆಸಕ್ತಿ ವಹಿಸಿದ್ದು ಕೆ.ಎಮ್.ಎಫ್ ಪ್ರಾಯೋಜಕತ್ವದಲ್ಲಿ ಕಂಬಳ ನಡೆಸಿ ರೈತರಿಗೆ ಪ್ರೋತ್ಸಾಹ ಮತ್ತು ಪ್ರಚಾರ ನೀಡುವ ಯೋಜನೆ ರೂಪಿಸಲಾಗುವುದೆಂದರು.
ಕಂಬಳಕ್ಕೆ ಕ್ರೀಡಾ ಇಲಾಖೆ, ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ, ಪ್ರವಾಸೋದ್ಯಮ ಇಲಾಖೆಯ ಮೂಲಕ ದೊರಕುವ ಸವಲತ್ತುಗಳನ್ನು ಸರಕಾರ ಒದಗಿಸುವಂತೆ, ಕಂಬಳ ಭವನ ನಿರ್ಮಾಣಕ್ಕೆ ಸರಕಾರಿ ಜಾಗ ಮಂಜೂರಾತಿ, ತರಬೇತು ಕೇಂದ್ರ ಸ್ಥಾಪನೆಗೆ ಕ್ರೀಡಾ ಇಲಾಖೆ ಸಹಭಾಗಿತ್ವ ಹಾಗೂ ರಾಜ್ಯ ಕಂಬಳ ಅಸೋಸಿಯೇಶನ್ಗೆ ವಿಶೇಷ ಸ್ಥಾನಮಾನ ಒದಗಿಸುವ ಬಗ್ಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿತ್ತು.
ಕಂಬಳಕ್ಕೆ ಸಂಪೂರ್ಣ ಸಹಕಾರ ನೀಡುವ ಭರವಸೆ ಯನ್ನು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೀಡಿದ್ದಾರೆಂದು ರಾಜ್ಯ ಕಂಬಳ ಅಸೋಸಿಯೇಶನ್ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ತಿಳಿಸಿದ್ದಾರೆ.

