ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್
ಪರ್ಯಾಯ ವ್ಯವಸ್ಥೆಯಾಗುವವರೆಗೆ ಸಿದ್ದರಾಮಯ್ಯ ಹಂಗಾಮಿ ಮುಖ್ಯಮಂತ್ರಿ
(Bengaluru) ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ನೀಡಿದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹೋತ್ ಅವರು ಶುಕ್ರವಾರ ಬೆಳಿಗ್ಗೆ (ಮೇ 29) ಅಧಿಕೃತವಾಗಿ ಅಂಗೀಕರಿಸಿದ್ದಾರೆ.
ಗುರುವಾರ (ಮೇ 28) ದೆಹಲಿ ನಾಯಕರ ಸೂಚನೆಯ ಮೇರೆಗೆ ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಕುರಿತು ರಾಜ್ಯಪಾಲರು ಇಂದು ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟವನ್ನು ವಿಸರ್ಜಿಸಲಾಗಿದೆ ಎಂದು ತಿಳಿಸಿದ್ದಾರೆ.
ಮುಂದಿನ ಪರ್ಯಾಯ ವ್ಯವಸ್ಥೆ ಕಲ್ಪಿಸುವ ತನಕ, ಎಂದರೆ ಹೊಸ ಮುಖ್ಯಮಂತ್ರಿ ಆಯ್ಕೆಯಾಗಿ ಪ್ರಮಾಣವಚನ ಸ್ವೀಕರಿಸುವವರೆಗೆ ಸಿದ್ದರಾಮಯ್ಯನವರೇ ಹಂಗಾಮಿ ಮುಖ್ಯಮಂತ್ರಿಯಾಗಿ ಆ ಹುದ್ದೆಯಲ್ಲಿ ಮುಂದುವರೆಯಲಿದ್ದಾರೆ ಎಂದು ರಾಜ್ಯಪಾಲರ ಕಚೇರಿ ಸ್ಪಷ್ಟಪಡಿಸಿದೆ.
ಮುಂದಿನ ಸಿಎಂ ಡಿ.ಕೆ. ಶಿವಕುಮಾರ್
ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಹೈಕಮಾಂಡ್ ಸಭೆಯ ನಿರ್ಧಾರದಂತೆ, ಪ್ರಸ್ತುತ ಉಪಮುಖ್ಯಮಂತ್ರಿಯಾಗಿರುವ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವ ನಿಟ್ಟಿನಲ್ಲಿ ಸಿದ್ದರಾಮಯ್ಯನವರು ರಾಜೀನಾಮೆ ನೀಡಿದ್ದಾರೆ. ತಮ್ಮ ಎರಡನೇ ಅವಧಿಯಲ್ಲಿ ಕೇವಲ ಮೂರು ವರ್ಷಗಳನ್ನು ಪೂರೈಸಿದ ನಂತರ, ಕಾಂಗ್ರೆಸ್ ವರಿಷ್ಠರ ಸೂಚನೆಗೆ ಮಣಿದು ಸಿದ್ದರಾಮಯ್ಯ ಈ ನಿರ್ಧಾರ ಕೈಗೊಂಡಿದ್ದಾರೆ. ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಶೀಘ್ರದಲ್ಲೇ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ರಾಜ್ಯ ರಾಜಕಾರಣದಲ್ಲೇ ಮುಂದುವರಿಕೆ: ಸಿದ್ದರಾಮಯ್ಯ
ತಮ್ಮರಾಜೀನಾಮೆ ಸಲ್ಲಿಕೆಯ ಬಳಿಕ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದ ಸಿದ್ದರಾಮಯ್ಯ, ಪಕ್ಷದ ಹೈಕಮಾಂಡ್ ತಮಗೆ ರಾಜ್ಯಸಭಾ ಸದಸ್ಯ ಸ್ಥಾನವನ್ನು ನೀಡಲು ಮುಂದಾಗಿದ್ದರೂ, ಅದನ್ನು ನಯವಾಗಿ ತಿರಸ್ಕರಿಸಿರುವುದಾಗಿ ಸ್ಪಷ್ಟಪಡಿಸಿದ್ದರು
“ನಾನು ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯಲಿದ್ದು, ಕರ್ನಾಟಕದಲ್ಲಿಯೇ ಉಳಿಯುತ್ತೇನೆ” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

