ಸಿಎಂ ಸಿದ್ದರಾಮಯ್ಯನವರಿಂದ ‘ಬ್ರೇಕ್ ಫಾಸ್ಟ್ ಮೀಟಿಂಗ್‘
ಸಿಎಂ ಅವರ ಅಧಿಕೃತ ನಿವಾಸ ‘ಕಾವೇರಿ‘ಯಲ್ಲಿ ನಡೆದ ಟೀ ಪಾರ್ಟಿ
(Bengaluru) ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಿಎಂ ರಾಜೀನಾಮೆ ವದಂತಿಗಳ ಬಿರುಗಾಳಿ ತೀವ್ರಗೊಂಡಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಹಮ್ಮಿಕೊಂಡಿರುವ ‘ಬ್ರೇಕ್ ಫಾಸ್ಟ್ ಮೀಟಿಂಗ್’ (Breakfast Meeting) ಭಾರಿ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.
ಸಿಎಂ ಅವರ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಈ ಮಹತ್ವದ ಸಭೆ ನಡೆಯುತ್ತಿದ್ದು, ರಾಜ್ಯ ಸಚಿವ ಸಂಪುಟದ ಪ್ರಮುಖ ನಾಯಕರು ಪಾಲ್ಗೊಂಡಿದ್ದಾರೆ.
ರಾಜ್ಯ ರಾಜಕಾರಣದ ಕ್ಷಿಪ್ರ ಬೆಳವಣಿಗೆಗಳ ನಡುವೆ ನಡೆದಿರುವ ಈ ದಿಢೀರ್ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸೇರಿದಂತೆ ಪ್ರಮುಖ ಸಚಿವರು ಭಾಗವಹಿಸಿದ್ದಾರೆ. ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟಪಡಿಸಿದ ಬೆನ್ನಲ್ಲೇ, ಸಚಿವರನ್ನು ಒಟ್ಟಿಗೆ ಸೇರಿಸಿ ಸಿಎಂ ಸಿದ್ದರಾಮಯ್ಯ ಅವರು ನಡೆಸುತ್ತಿರುವ ಈ ರಾಜಕೀಯ ರಣತಂತ್ರದ ಸಭೆ ತೀವ್ರ ಸಂಚಲನ ಮೂಡಿಸಿದೆ.
ಸಿಎಂ ನಿವಾಸದ ಸಭೆಯಲ್ಲಿ ಹಾಜರಿರುವ ಪ್ರಮುಖ ಮಂತ್ರಿಗಳು:
ಮುಖ್ಯಮಂತ್ರಿಗಳ ಕಾವೇರಿ ನಿವಾಸದಲ್ಲಿ ನಡೆಯುತ್ತಿರುವ ಈ ಹೈವೋಲ್ಟೇಜ್ ಉಪಹಾರ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ. ಜಿ.ಪರಮೇಶ್ವರ್, ಸಚಿವರಾದ ಎಂ.ಬಿ. ಪಾಟೀಲ್, ಪ್ರಿಯಾಂಕ್ ಖರ್ಗೆ, ಭೈರತಿ ಸುರೇಶ್, ಸಂತೋಷ್ ಲಾಡ್, ಎಂ.ಸಿ. ಸುಧಾಕರ್, ಎಸ್.ಎಸ್. ಮಲ್ಲಿಕಾರ್ಜುನ, ಕೆ.ಜೆ. ಜಾರ್ಜ್, ಕೆ. ವೆಂಕಟೇಶ್ ಹಾಗೂ ಶಿವರಾಜ್ ತಂಗಡಗಿ ಉಪಸ್ಥಿತರಿದ್ದಾರೆ.
ಇವರೊಂದಿಗೆ ಸಚಿವರಾದ ಚೆಲುವರಾಯಸ್ವಾಮಿ, ಲಕ್ಷ್ಮೀ ಹೆಬ್ಬಾಳ್ಕರ್, ಶರಣಬಸಪ್ಪ ದರ್ಶನಾಪುರ, ಮಧು ಬಂಗಾರಪ್ಪ, ಸತೀಶ್ ಜಾರಕಿಹೋಳಿ, ಎಚ್.ಸಿ. ಮಹದೇವಪ್ಪ, ಮಂಕಾಳ್ ವೈದ್ಯ, ಆರ್.ಬಿ. ತಿಮ್ಮಾಪುರ್, ಶರಣಪ್ರಕಾಶ್ ಪಾಟೀಲ್, ಕೆ.ಎಚ್. ಮುನಿಯಪ್ಪ, ಎಚ್.ಕೆ. ಪಾಟೀಲ್, ಈಶ್ವರ್ ಖಂಡ್ರೆ, ಎನ್.ಎಸ್. ಬೋಸರಾಜು ಮತ್ತು ದಿನೇಶ್ ಗುಂಡೂರಾವ್ ಸೇರಿದಂತೆ ಒಟ್ಟು 26 ಪ್ರಮುಖ ಸಚಿವರು ಸಭೆಯಲ್ಲಿದ್ದಾರೆ. ಕೈ ಪಾಳಯದ ಮುಂದಿನ ಹೆಜ್ಜೆ ಹಾಗೂ ಸರ್ಕಾರದ ಒಗ್ಗಟ್ಟಿನ ಪ್ರದರ್ಶನದ ದೃಷ್ಟಿಯಿಂದ ಈ ಸಭೆ ಅತ್ಯಂತ ನಿರ್ಣಾಯಕ ಎನ್ನಲಾಗಿದೆ.

