ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳಗೆ ದೊಡ್ಡ ಜಯ
(New Dhelhi) ನವದೆಹಲಿ: ದೆಹಲಿಯ ಜಂತರ್ ಮಂತರ್ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ” (CJP) ನಡೆಸಿದ ಬೃಹತ್ ಪ್ರತಿಭಟನೆಗಳ ಬೆನ್ನಲ್ಲೇ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan Resignation) ಇಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಶುಕ್ರವಾರ ಕೇಂದ್ರ ಸಚಿವರಾದ ಜೆಪಿ ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರನ್ನು ಭೇಟಿಯಾಗಿದ್ದ ಸಿಜೆಪಿ ವಕ್ತಾರರು ತಮ್ಮ 3 ಬೇಡಿಕೆಗಳನ್ನು ಸಲ್ಲಿಸಿದ್ದರು. ಅದರಲ್ಲಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆಯೇ ಮೊದಲ ಮತ್ತು ಮುಖ್ಯವಾದ ಬೇಡಿಕೆಯಾಗಿತ್ತು.
ಸಂಧಾನ ಮಾತುಕತೆಯ ವೇಳೆ ಉಳಿದ ಎರಡು ಬೇಡಿಕೆಗಳಿಗೆ ಕೂಡಲೇ ಒಪ್ಪಿಗೆ ಸೂಚಿಸಿದ್ದ ಕೇಂದ್ರ ಸಚಿವರು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ನಿರ್ಧಾರ ತೆಗೆದುಕೊಳ್ಳಲು ಶನಿವಾರ ಮಧ್ಯಾಹ್ನದವರೆಗೆ ಸಮಯ ಕೋರಿದ್ದರು.
ಇದೀಗ ಕೊನೆಗೂ ಸಿಜೆಪಿ ಹಾಗೂ ಪ್ರತಿಭಟನಾಕಾರರ ಬೇಡಿಕೆಗೆ ಮಣಿದಿರುವ ಕೇಂದ್ರ ಸರ್ಕಾರ, ಧರ್ಮೇಂದ್ರ ಪ್ರಧಾನ್ ಅವರಿಂದ ರಾಜೀನಾಮೆ ಪಡೆದಿದೆ. ಅಲ್ಲಿಗೆ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವವರ ಎಲ್ಲ ಬೇಡಿಕೆಗಳೂ ಈಡೇರಿದಂತಾಗಿದೆ.
ರಾಜೀನಾಮೆ ಬಳಿಕ ಧರ್ಮೇಂದ್ರ ಪ್ರಧಾನ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿ, “ಜಂತರ್ ಮಂತರ್ನಲ್ಲಿ ಹಾಗೂ ದೇಶಾದ್ಯಂತ ಇರುವ ಪರಿಸ್ಥಿತಿಯ ಲಾಭವನ್ನು ದೇಶವಿರೋಧಿ ಶಕ್ತಿಗಳು ಪಡೆಯಬಾರದು. ದೇಶವು ಒಗ್ಗಟ್ಟಿನಿಂದ ಇರಬೇಕು. ಭಾರತದ ವಿದ್ಯಾರ್ಥಿಗಳು ಕಾನೂನು ಸಂಕಷ್ಟದಲ್ಲಿ ಸಿಲುಕಿಕೊಳ್ಳದೆ ತಮ್ಮ ಅಧ್ಯಯನ ಮತ್ತು ವೃತ್ತಿಜೀವನದ ಮೇಲೆ ಗಮನ ಹರಿಸಬೇಕು .
ಸಿಜೆಪಿ ಪ್ರತಿಕ್ರಿಯೆ:
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಬಳಿಕ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿದ ಸಿಜೆಪಿ, “ಶಿಕ್ಷಣ ಸಚಿವರು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ವಿದ್ಯಾರ್ಥಿ ಶಕ್ತಿಗೆ ಜಯವಾಗಲಿ” ಎಂದು ಬರೆದುಕೊಂಡಿದೆ.
ಇದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಜೆಪಿ ವಕ್ತಾರ ಅಶುತೋಷ್ ರಾಂಕಾ, “ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರೊಂದಿಗಿನ ಭೇಟಿ ಫಲಪ್ರದವಾಗಿದೆ. ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ವಿಷಯದಲ್ಲಿ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಿದ ನಂತರ ಸಿಜೆಪಿ ತನ್ನ ಮುಂದಿನ ನಡೆಯನ್ನು ನಿರ್ಧರಿಸಲಿದೆ”ಎಂದು ಹೇಳಿದ್ದರು.

