ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಗೆ ಬೆಳ್ಳಿ ಹಬ್ಬದ ಸಂಭ್ರಮ
ಕಾರ್ಯಕ್ರಮ ಉದ್ಘಾಟಿಸಿದ ಸಚಿವ ಕೆ.ಜೆ.ಜಾರ್ಜ್, ಸಚಿವ ಯುಟಿ ಖಾದರ್
(Mangaluru) ಮಂಗಳೂರು: ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯು ರಾಜ್ಯದಲ್ಲೇ ಮಾದರಿಯ ಕೆಲಸಗಳನ್ನು ಮಾಡಿರುವವರಲ್ಲಿ ಅಗ್ರರ ಸ್ಥಾನಿಯಾಗಿದ್ದಾರೆ. ಸಮಿತಿಯ ಕೊಡುಗೆ ಗಮನಾರ್ಹವಾಗಿದೆ ರಾಜ್ಯ ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಹೇಳಿದರು.
ಮಂಗಳೂರಿನ ಕುದ್ಗುಲ್ ರಂಗರಾವ್ ಪುರಭವನದಲ್ಲಿ ಭಾನುವಾರ ಸಂಜೆ ನಡೆದ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಬೆಳ್ಳಿ ಹಬ್ಬ ಮಹೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ಕರಾವಳಿ ಜಿಲ್ಲೆಗಳಿಗೆ ನಿರಂತರ ವಿದ್ಯುತ್ ಪೂರೈಸುವ ನಿಟ್ಟಿನಲ್ಲಿ ಸರಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದು, 120 ಸಬ್ಸ್ಟೇಷನ್ಗಳನ್ನು ನಿರ್ಮಿಸಲಾಗುತ್ತಿದೆ. ಆಕ್ರಮ- ಸಕ್ರಮ ಯೋಜನೆಯಡಿ ಬಾಕಿ ಇರುವ ಸಮಸ್ಯೆಗಳನ್ನೂ ಬಗೆಹರಿಸಲಾಗುತ್ತಿದೆ ಎಂದರು.
ಅನಿವಾಸಿ ಭಾರತೀಯ ಉದ್ಯಮಿ ಹಾಗೂ ಇನ್ ಸ್ಪಿಟ್ಯೂಟ್ ಆಫ್ ಡೈರೆಕ್ಟರ್ಸ್ ಡಿಸ್ಟಿಂಗ್ವಿಶ್ ಫೆಲೋ ಡಾ. ರೊನಾಲ್ಡ್ ಕೊಲಾಸೊ ಮಾತನಾಡಿ, ಅಭಿವೃದ್ಧಿ ಮತ್ತು ಪರಿಸರ ಪರಸ್ಪರ ವಿರೋಧಿಗಳಲ್ಲ. ಎರಡೂ ಸಹಬಾಳ್ವೆಯಿಂದ, ಸಮನ್ವಯದೊಂದಿಗೆ ಸಾಗಬೇಕು. ಕರಾವಳಿಯ ಮೂರು ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕಿದೆ. ಇಲ್ಲಿನ ಪ್ರವಾಸಿ ತಾಣಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸುವ ಅಗತ್ಯವಿದೆ. ಕರಾವಳಿಯ ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ ‘ಟೂರಿಸಂ ಟಾಸ್ಕ್ ಫೋರ್ಸ್’ ರಚಿಸುವ ಅಗತ್ಯವಿದೆ ಎಂದು ಹೇಳಿದರು.
ಸಮಿತಿಯ ಸಂಸ್ಥಾಪಕ ತೋನ್ಸೆ ಜಯಕೃಷ್ಣ ಎ.ಶೆಟ್ಟಿ ಮಾತನಾಡಿ, ಕರಾವಳಿ ಜಿಲ್ಲೆಗಳಿಗೆ ಯಾವುದೇ ಲೋಡ್ ಶೆಡ್ಡಿಂಗ್ ಇಲ್ಲದೆ ಶಾಶ್ವತವಾಗಿ 24×7 ವಿದ್ಯುತ್ ಪೂರೈಸುವ ವ್ಯವಸ್ಥೆ ಕಲ್ಪಿಸಬೇಕು, ಕರಾವಳಿಯ ಸಮಗ್ರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಬೇಕು. ಕಡಲ್ಗೊರೆತ ತಡೆಗೆ ಪ್ರತಿವರ್ಷ ಕಲ್ಲುಗಳನ್ನು ಹಾಕಿ ತಡೆಗೋಡೆ ನಿರ್ಮಿಸಲಾಗುತ್ತಿದೆ. ಆದರೆ ಕಡಲ್ಗೊರೆತದ ಸಂದರ್ಭ ಅವುಗಳು ಸವೆಯುತ್ತವೆ. ಮುಂಬಯಿನ ಮರೈನ್ ಡೈವ್ ಮಾದರಿಯಲ್ಲಿ ಶಾಶ್ವತ ಕಾಂಕ್ರೀಟ್ ತಡೆಗೋಡೆ ನಿರ್ಮಿಸುವ ವ್ಯವಸ್ಥೆ ಜಾರಿಗೆ ಬರಬೇಕು ಎಂದು ಜಯಕೃಷ್ಣ ಶೆಟ್ಟಿ ಸರಕಾರವನ್ನು ಆಗ್ರಹಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಮಾತನಾಡಿ, ಭವಿಷ್ಯದ ದೃಷ್ಟಿಯಿಂದ ನಾನಾ ಆಯಾಮಗಳಲ್ಲಿ ಚಿಂತನೆ ನಡೆಸಬೇಕಿದೆ. ಅಭಿವೃದ್ಧಿಗೆ ಅಗತ್ಯವಿರುವ ಕಾರ್ಯಗಳನ್ನು ಕಾಲಕಾಲಕ್ಕೆ ಅನುಷ್ಠಾನಗೊಳಿಸಲು ಪ್ರಯತ್ನಿಸಬೇಕು. ಆರ್ಥಿಕ ಚಟುವಟಿಕೆಗಳು ವೇಗ ಪಡೆದುಕೊಂಡಾಗ ಮಾತ್ರ ಸ್ಥಳೀಯವಾಗಿ ಅಭಿವೃದ್ಧಿ ಸಾಧ್ಯ ಎಂದರು.
ಸಮಿತಿಯ ಅಧ್ಯಕ್ಷ ತೋನ್ಸೆ ನಿತ್ಯಾನಂದ ಡಿ. ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಕರಾವಳಿ ಕರ್ನಾಟಕ ಅಭಿವೃದ್ಧಿ ಮಂಡಳಿ ಕಾರ್ಯಾಧ್ಯಕ್ಷ ಎಂ.ಎ. ಗಫೂರ್, ಬಂಟರ ಸಮಿತಿಯ ಸಂಘ ಮುಂಬಯಿ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ವಿಶ್ವ ದೇವಾಡಿಗ ಮಹಾಮಂಡಲದ ಅಧ್ಯಕ್ಷ ಧರ್ಮಪಾಲ ದೇವಾಡಿಗ, ದುಬೈ ಉದ್ಯಮಿ ಡಾ. ಡೇವಿಡ್ ಫ್ರಾಂಕ್ ಫರ್ನಾಂಡಿಸ್, ಸಂಯೋಜಕ ಕೆ.ಪಿ.ಜಗದೀಶ್ ಅಧಿಕಾರಿ, ಕೋಶಾಧಿಕಾರಿ ಸದಾನಂದ ಎನ್.ಆಚಾರ್ಯ, ನಿಧಿ ಸಂಗ್ರಹ ಸಮಿತಿ ಕಾರ್ಯಾಧ್ಯಕ್ಷ ಡಾ.ಆರ್.ಕೆ.ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ- ಉಡುಪಿ ವಿಭಾಗದ ಕಾರ್ಯಾಧ್ಯಕ್ಷ ಹರೀಶ್ ಕುಮಾರ್ ಎಂ.ಶೆಟ್ಟಿ ಸ್ವಾಗತಿಸಿದರು. ವಕ್ತಾರ ದಯಾಸಾಗರ್ ಚೌಟ ಕಾರ್ಯಕ್ರಮ ನಿರೂಪಿಸಿದರು. ಗೌರವ ಪ್ರಧಾನ ಕಾರ್ಯದರ್ಶಿ ಮುಂಡ್ಕೂರು ಸುರೇಂದ್ರ ಸಾಲ್ಯಾನ್ ವಂದಿಸಿದರು.
ಕಾರ್ಯಕ್ರಮದ ಆರಂಭದಲ್ಲಿ ವಿದುಷಿ ಮಂಜುಳಾ ಸುಬ್ರಹ್ಮಣ್ಯ ಈ ನಿರ್ದೇಶನದಲ್ಲಿ ಪುತ್ತೂರಿನ ನಾಟ್ಯರಂಗ ತಂಡದಿಂದ ‘ನಾಟ್ಯಲಹರಿ’ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

