ಶಿರ್ವ: ಕಾಲೇಜು ವಿದ್ಯಾರ್ಥಿಗಳ ನೇತ್ರ ತಪಾಸಣಾ ಶಿಬಿರ
ಶಿರ್ವ ಸಂತ ಮೇರಿ ಪದವಿಪೂರ್ವ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ನಡೆದ ಕಾರ್ಯಕ್ರಮ
(Shirva) ಶಿರ್ವ: ಶಿರ್ವ ಸಂತ ಮೇರಿ ಪದವಿಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ, ಲಯನ್ಸ್ ಕ್ಲಬ್ ಶಿರ್ವ- ಮಂಚಕಲ್ಲು ಇವರ ಸಹಯೋಗದಲ್ಲಿ ಉಡುಪಿಯ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರ ತಂಡದಿಂದ ಕಾಲೇಜಿನ ವಿದ್ಯಾರ್ಥಿಗಳ ಹಾಗೂ ವಿದ್ಯಾರ್ಥಿಗಳ ಹೆತ್ತವರ/ ಪೋಷಕರ ನೇತ್ರ ತಪಾಸಣಾ ಶಿಬಿರವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಪ. ಪೂ ಕಾಲೇಜಿನ ಪ್ರಾಂಶುಪಾಲರಾದ ಜಯಶಂಕರ್ ಕೆ ರವರು ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ನಿರಂತರವಾಗಿ ಮೊಬೈಲ್ ವೀಕ್ಷಣೆ ಮಾಡುವುದರಿಂದ ಕಣ್ಣಿನ ಮೇಲಾಗುವ ಪರಿಣಾಮವನ್ನು ತಡೆಗಟ್ಟಲು, ಇದರ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ ಆರ್ ಪಾಟ್ಕರ್ ಪ್ರಾಸ್ತಾವಿಕವಾಗಿ ಮಾತನಾಡಿ, ಮೊಬೈಲ್ ವೀಕ್ಷಣೆಯಿಂದ ಕಣ್ಣಿನ ದೃಷ್ಟಿ ದೋಷದ ಪರಿಣಾಮ ಉಂಟಾಗಬಹುದು. ಆದ್ದರಿಂದ ನಿರಂತರವಾಗಿ ಕಣ್ಣಿನ ತಪಾಸಣೆ ಮಾಡಬೇಕೆಂದಿ ಮನವಿ ಮಾಡಿದರು.
ಪ್ರಸಾದ್ ನೇತ್ರಾಲಯದ ಕಣ್ಣಿನ ವೈದ್ಯರಾದ ಡಾ. ಅಶ್ರೀತ್, ಲಯನ್ಸ್ ಕ್ಲಬ್ ಶಿರ್ವ ಮಂಚಕಲ್ ಇದರ ಉಪಾಧ್ಯಕ್ಷ ಲ. ರಾಕೇಶ್ ಮಚಾದೊ, ಶಿರ್ವ ಚರ್ಚಿನ ಪಾಲನಾ ಮಂಡಳಿಯ ಉಪಾಧ್ಯಕ್ಷ ಲ. ಜೂಲಿಯಾನ ರೋಡ್ರಿಗಸ್, ಕ್ಯಾಥೋಲಿಕ್ ಸಭಾ ಅಧ್ಯಕ್ಷ ಮೆಲ್ವಿನ್ ಅರಾನ್ಹಾ, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಲಯನ್ಸ್ ಕ್ಲಬ್ಬಿನ ಸದಸ್ಯರು, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ ಆರ್ ಪಾಟ್ಕರ್ ಸ್ವಾಗತಿಸಿದರು. ಲ. ಅರ್ವಿನ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಮೋಹನ್ ನೊರೋನ್ಹಾ ವಂದಿಸಿದರು.
ಕಾರ್ಯಕ್ರಮದಲ್ಲಿ ನಂತರ ಸುಮಾರು 400 ವಿದ್ಯಾರ್ಥಿಗಳ ಹಾಗೂ ಹೆತ್ತವರ ನೇತ್ರ ತಪಾಸಣೆ ಮಾಡಲಾಯಿತು.

