ಕಾಪುವಿನ ಸುಭಾಷ್ ನಗರದಲ್ಲಿ ಕೊಬ್ಬರಿ ಘಟಕಕ್ಕೆ ಬೆಂಕಿ
ಲಕ್ಷಾಂತರ ರೂಪಾಯಿ ನಷ್ಠ
(Kaup) ಕಾಪು : ಕೊಬ್ಬರಿ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ರೂಪಾಯಿ ನಷ್ಠ ಸಂಭವಿಸಿದ ಘಟನೆ ಶನಿವಾರ ಬೆಳಗ್ಗಿನ ಜಾವ ಘಟಿಸಿದೆ.
ಶಾರ್ಟ್ ಸರ್ಕಿಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಕ್ಷಣಾರ್ಧದಲ್ಲೇ ಘಟಕದಲ್ಲಿದ್ದ ಕೊಬ್ಬರಿ ದಾಸ್ತಾನಿಗೆ ಬೆಂಕಿ ವ್ಯಾಪಿಸಿದೆ.
ಸ್ಥಳೀಯರು ಉಡುಪಿಯ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದು, ಅಗ್ನಿಶಾಮಕ ದಳದ ಎರಡು ವಾಹನಗಳು ಸ್ಥಳಕ್ಕೆ ಆಗಮಿಸಿ, ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಳಿನಿ ಪುಷ್ಪಲತಾ ಸಾಲಿಯಾನ್ ಎಂಬರಿಗೆ ಸೇರಿದ ಘಟಕ ಇದಾಗಿದ್ದು, ಹಲವಾರು ವರ್ಷಗಳಿಂದ ಈ ಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದೆ.
ಕೊಬ್ಬರಿ ಘಟಕದಲ್ಲಿ ದಾಸ್ತಾನಿಟ್ಟಿದ್ದ ಅಪಾರ ಪ್ರಮಾಣದ ಕೊಬ್ಬರಿ ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಕೊಬ್ಬರಿ ಬೆಂಕಿಯಲ್ಲಿ ಕರಟಿ ಹೋಗಿದೆ.
ಅಂದಾಜಿನ ಪ್ರಕಾರ ಸುಮಾರು 10ರಿಂದ 15 ಲಕ್ಷ ರೂಪಾಯಿ ನಷ್ಟ ಸಂಭವಿಸಿರುವ ಸಾಧ್ಯತೆ ಇದೆ.
ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಹಾಗೂ ನಷ್ಟದ ನಿಖರ ಪ್ರಮಾಣದ ಬಗ್ಗೆ ಪರಿಶೀಲನೆ ನಡೆಯುತ್ತಿದೆ.
ಕಾಪು ಪೋಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

